
ಪ್ರವಾದಿ ಮೊಹಮ್ಮದ್ ಅವಹೇಳನಕಾರಿ ಹೇಳಿಕೆ ಅರಸೀಕೆರೆಯಲ್ಲಿ ಪ್ರತಿಭಟನೆ
ಅರಸೀಕೆರೆ: ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿರುವ ವಿಡಿಯೊವೊಂದರಲ್ಲಿ ಪ್ರವಾದಿ ಮೊಹಮ್ಮದ್ ಹಾಗೂ ಉಮ್ಮುಲ್ ಮೊಮಿನೀನ್ ಹಜ್ರತ್ ಆಯಿಷಾ (ರ.ಅ.) ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಲಾಗಿದೆ ಎಂಬ ಆರೋಪ ಖಂಡಿಸಿ ಅರಸೀಕೆರೆಯಲ್ಲಿ ಸುನ್ನಿ ಮುಸ್ಲಿಂ ಜಮಾತ್ ಕಮಿಟಿಯ ನೇತೃತ್ವದಲ್ಲಿ ಮುಸ್ಲಿಂ ಸಮುದಾಯದ ಸದಸ್ಯರು ಪ್ರತಿಭಟನೆ ನಡೆಸಿದರು.
ನಗರದ ಸುನ್ನಿ ಜಾಮಿಯಾ ಮಸೀದಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಆರೋಪ ಎದುರಿಸುತ್ತಿರುವ ನಾಜಿಯಾ ಇಲಾಹಿ ಖಾನ್ ಅವರ ಭಾವಚಿತ್ರಕ್ಕೆ ಚಪ್ಪಲಿ ಸೇವೆ ನಡೆಸಿ, ಪ್ರತಿಕಾತ್ಮಕವಾಗಿ ಬ್ಯಾನರ್ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. “ಪ್ರವಾದಿ ಮೊಹಮ್ಮದ್ ಹಾಗೂ ಅವರ ಕುಟುಂಬದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ” ಎಂದು ಘೋಷಣೆಗಳನ್ನು ಕೂಗಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸುನ್ನಿ ಮುಸ್ಲಿಂ ಜಮಾತ್ ಕಮಿಟಿಯ ಕಾರ್ಯದರ್ಶಿ ಅಬ್ದುಲ್ ಜಮೀಲ್, “ಪ್ರವಾದಿ ಮೊಹಮ್ಮದ್ ಅವರು ಮಾನವಕುಲಕ್ಕೆ ಶಾಂತಿ, ಪ್ರೀತಿ, ಸಮಾನತೆ ಮತ್ತು ಸಹೋದರತ್ವದ ಸಂದೇಶ ಸಾರಿದ ಮಹಾನ್ ವ್ಯಕ್ತಿತ್ವ. ಮಹಿಳೆಯರ ಹಕ್ಕುಗಳು, ಸಾಮಾಜಿಕ ನ್ಯಾಯ ಮತ್ತು ಸೌಹಾರ್ದತೆಯ ಮೌಲ್ಯಗಳನ್ನು ಸಾರಿದ ಪ್ರವಾದಿಯವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪ ಅತ್ಯಂತ ಖಂಡನೀಯ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಹೇಳಿಕೆಗಳನ್ನು ಯಾರೂ ನೀಡಬಾರದು. ಸಂಬಂಧಪಟ್ಟವರ ವಿರುದ್ಧ ಸರ್ಕಾರ ಮತ್ತು ಪೊಲೀಸ್ ಇಲಾಖೆ ತಕ್ಷಣ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.
ಪ್ರತಿಭಟನೆ ಬಳಿಕ ಸಮಿತಿಯ ಪದಾಧಿಕಾರಿಗಳು ತಾಲೂಕು ಆಡಳಿತ ಹಾಗೂ ಅರಸೀಕೆರೆ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದರು. ದೂರಿನಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಅಡಿಯಲ್ಲಿ ಪ್ರಕರಣ ದಾಖಲಿಸಿ, ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಮನವಿ ಮಾಡಿದರು. ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸಂಬಂಧಿತ ವಿಡಿಯೊವನ್ನು ತಕ್ಷಣ ತೆರವುಗೊಳಿಸುವುದು, ಅದರ ಡಿಜಿಟಲ್ ದಾಖಲೆಗಳನ್ನು ಸಂರಕ್ಷಿಸುವುದು ಹಾಗೂ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಒತ್ತಾಯಿಸಿದರು.
ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಮನವಿ ಸ್ವೀಕರಿಸಿದ್ದು, ಪ್ರಕರಣದ ಬಗ್ಗೆ ಕಾನೂನು ಪ್ರಕಾರ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
– ಎಂ.ಡಿ. ನಾಸೀರ್, ಅರಸೀಕೆರೆ