ಅರಸೀಕೆರೆ ಬೀದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವವರೆಗೆ ತೆರವು ಕಾರ್ಯ ಬೇಡ: ಶಾಸಕ ಕೆ.ಎಂ. ಶಿವಲಿಂಗೇಗೌಡ
ಅರಸೀಕೆರೆ: ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಪಾದಚಾರಿ ಮಾರ್ಗ (ಫುಟ್ಪಾತ್) ಮತ್ತು ರಸ್ತೆ ಬದಿಯಲ್ಲಿ ವ್ಯಾಪಾರ ನಡೆಸುತ್ತಿರುವ ಬೀದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆಯನ್ನು ರಾಜ್ಯಾದ್ಯಂತ ಕೈಗೊಂಡಿರುವ ಬೆನ್ನಲ್ಲೇ, ಅರಸೀಕೆರೆಯ ಬೀದಿ ವ್ಯಾಪಾರಿಗಳು ತಮ್ಮ ಆತಂಕವನ್ನು ಸ್ಥಳೀಯ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರ ಗಮನಕ್ಕೆ ತಂದರು.
ಈ ವೇಳೆ ವ್ಯಾಪಾರಿಗಳೊಂದಿಗೆ ಮಾತನಾಡಿದ ಶಾಸಕ ಶಿವಲಿಂಗೇಗೌಡ, “ಸುಪ್ರೀಂ ಕೋರ್ಟ್ ಆದೇಶದ ಅನುಸಾರ ಬೆಂಗಳೂರು ಸೇರಿದಂತೆ ದೊಡ್ಡ ನಗರಗಳು ಹಾಗೂ ಹಲವು ಜಿಲ್ಲೆಗಳಲ್ಲಿ ತೆರವು ಕಾರ್ಯಾಚರಣೆ ನಡೆಯುತ್ತಿರುವುದು ನಿಜ. ಆದರೆ ಅರಸೀಕೆರೆಯ ಬೀದಿ ವ್ಯಾಪಾರಿಗಳು ಸದ್ಯಕ್ಕೆ ಆತಂಕಪಡುವ ಅಗತ್ಯವಿಲ್ಲ. ನಿಮ್ಮೊಂದಿಗೆ ನಾನು ಇದ್ದೇನೆ. ಫುಟ್ಪಾತ್ಗೆ ಪರ್ಯಾಯವಾಗಿ ಸೂಕ್ತ ಸ್ಥಳವನ್ನು ಗುರುತಿಸಿ ವ್ಯವಸ್ಥೆ ಕಲ್ಪಿಸುವವರೆಗೆ ಯಾರೂ ಭಯಪಡುವ ಅವಶ್ಯಕತೆ ಇಲ್ಲ,” ಎಂದು ಭರವಸೆ ನೀಡಿದರು.
ನಗರಸಭೆಯಿಂದ ಒಂದು ವಾರದ ಗಡುವು ನೀಡಿರುವ ಬಗ್ಗೆ ವ್ಯಾಪಾರಿಗಳು ಪ್ರಸ್ತಾಪಿಸಿದಾಗ, “ಪರ್ಯಾಯ ವ್ಯವಸ್ಥೆ ಆಗುವವರೆಗೆ ಯಾರಿಗೂ ತೊಂದರೆಯಾಗದ ರೀತಿಯಲ್ಲಿ ವ್ಯಾಪಾರ ಮುಂದುವರಿಸಬಹುದು. ವ್ಯಾಪಾರಿಗಳ ಜೀವನೋಪಾಯಕ್ಕೆ ಯಾವುದೇ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು,” ಎಂದು ಹೇಳಿದರು.
ಇದೇ ವೇಳೆ, ವ್ಯಾಪಾರಿಗಳಿಗೆ ಪರ್ಯಾಯ ಸ್ಥಳ ಕಲ್ಪಿಸುವವರೆಗೆ ಯಾವುದೇ ತೆರವು ಕ್ರಮ ಕೈಗೊಳ್ಳಬಾರದು ಎಂದು ನಗರಸಭೆ ಆಯುಕ್ತರಿಗೆ ಸೂಚನೆ ನೀಡಿರುವುದಾಗಿ ಶಾಸಕರು ತಿಳಿಸಿದರು.
ಸೂಕ್ತ ಸ್ಥಳವನ್ನು ಗುರುತಿಸಿ ಬೀದಿ ವ್ಯಾಪಾರಿಗಳಿಗೆ ಶಾಶ್ವತ ಪರ್ಯಾಯ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ನಗರಸಭೆ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ ಹೇಳಿದರು…..
ಈ ಸಂದರ್ಭದಲ್ಲಿ ಅರಸೀಕೆರೆ ನಗರಸಭೆ ಮಾಜಿ ಅಧ್ಯಕ್ಷರಾದ ಎಂ ಸಮೀವುಲ್ಲಾ
ಹೇಮಂತ್ ಕುಮಾರ್ ಜಿಲ್ಲಾ ಉಪಾಧ್ಯಕ್ಷರು ಕರವೇ ಸಿಕಂದರ್ ಮಾಜಿ ಅಧ್ಯಕ್ಷರು ಜಿಲ್ಲಾ ವಕ್ಫ್ ಬೋರ್ಡ್ ಹಾಗೂ ಇತರರು ಉಪಸ್ಥಿತರಿದ್ದರು
ವರದಿ ಎಂ ಡಿ ನಾಸೀರ್ ಅರಸೀಕೆರೆ
ಬೀದಿ ಬದಿ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವವರಿಗೆ ತೆರವು ಕಾರ್ಯ ಬೇಡ
Leave a Comment