ಸಿಇಒ ಶುಭಂ ಶುಕ್ಲಾ ರವರಿಂದ ಕ್ಷೇತ್ರ ಭೇಟಿ
ಹಾಸನ ಜೂ.10 ಸರ್ಕಾರಿ ಆಸ್ಪತ್ರೆಗಳಲ್ಲಿ ಸಕಾಲದಲ್ಲಿ ಚುಚ್ಚು ಮದ್ದುಗಳು ಹಾಗೂ ಔಷದಿಗಳು ಲಭ್ಯವಿರುವಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶುಭಂ ಶುಕ್ಲಾ ತಿಳಿಸಿದ್ದಾರೆ.
ಅರಸೀಕೆರೆ ತಾಲ್ಲೋಕಿನ ಉಂಡಿಗನಾಳು, ಬಂದೂರು ಹಾಗೂ ಜಾವಗಲ್ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ವಿವಿಧ ಯೋಜನೆಗಳಡಿ ಅನುಷ್ಟಾನ ಮಾಡಲಾಗಿರುವ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡಿದರು.
ಉಂಡಿಗನಾಳು ಗ್ರಾಮ ಪಂಚಾಯಿತಿಯ ಪ್ರಾಥಮಿಕ ಚಿಕಿತ್ಸಾ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿಯ ವ್ಯವಸ್ಥೆಗಳ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು. ಆಸ್ಪತ್ರೆಗೆ ಭೇಟಿ ನೀಡಿದ್ದ ರೋಗಿಗಳು ಹಾಗೂ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿದರು.
ಅಂಗನವಾಡಿಯಲ್ಲಿ ಅಳವಡಿಸಿರುವ ನಲ್ಲಿಯಲ್ಲಿ ನೀರು ಬರದಿರುವುದನ್ನು ಗಮನಿಸಿ ಕೂಡಲೇ ಸರಿಪಡಿಸಿ ವರದಿ ಮಾಡುವಂತೆ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ಸೂಚಿಸಿದರು.
ಜಲ ಜೀವನ್ ಮಿಷನ್ ಯೋಜನೆಯಡಿ ಪೈಪ್ ಲೈನ್ ಅನ್ನು ಚರಂಡಿಯಲ್ಲಿಯೇ ಅಳವಡಿಸಿರುವುದನ್ನು ಪರಿಶೀಲಿಸಿ ಸಂಬAಧಪಟ್ಟ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಸರಿಪಡಿಸುವಂತೆ ಸೂಚಿಸಿದರು.
5054 ಯೋಜನೆಯಡಿ ಅನುಷ್ಟಾನ ಮಾಡಲಾಗಿರುವ ಸಿಸಿ ರಸ್ತೆಗಳನ್ನು ಪರಿಶೀಲಿಸಿ. ಖುದ್ದಾಗಿ ಅಳತೆ ಪ್ರಮಾಣಗಳನ್ನು ಪರಿಶೀಲಿಸಿ ನ್ಯೂನ್ಯತೆಗಳನ್ನು ಸರಿಪಡಿಸುವಂತೆ ಸೂಚಿಸಿದರು. ಬಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಲಿಂಗ್ಲಾಪುರ ಗ್ರಾಮಕ್ಕೆ ಹೋಗುವ ಡಾಂಬರು ರಸ್ತೆಯನ್ನು ಪರಿಶೀಲಿಸಿದರು.
ಜಾವಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆ.ಪಿ.ಎಸ್ ಶಾಲೆಗೆ ಭೇಟಿ ನೀಡಿ ಶಾಲೆಯ ಸ್ವಚ್ಚತೆಯನ್ನು ಕಾಪಾಡುವಂತೆ ಹಾಗೂ ನೀರು ಪೋಲಾಗದಂತೆ ನಲ್ಲಿಗಳನ್ನು ಅಳವಡಿಸುವಂತೆ ಶಾಲಾ ಶಿಕ್ಷಕರಿಗೆ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ಸೂಚಿಸಿದರು.
ಶಾಲಾ ಆವರಣದಲ್ಲಿ ನರೇಗಾ ಯೋಜನೆಯಡಿ ನಿರ್ಮಾಣವಾಗಿರುವ ಶಾಲಾ ಶೌಚಾಲಯ ಹಾಗೂ ಶಾಲಾ ಅಡುಗೆ ಕೋಣೆ ಕಾಮಗಾರಿಗಳನ್ನು ಪರಿಶೀಲಿಸಿ ನ್ಯೂನ್ಯತೆಗಳನ್ನು ಸರಿಪಡಿಸುವಂತೆ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಸೂಚಿಸಿದರು, ಶಾಲಾ ಮಕ್ಕಳೊಂದಿಗೆ ಸಮಾಲೋಚಿಸಿ ಕುಂದು ಕೊರತೆಗಳನ್ನು ವಿಚಾರಿಸಿದರು.
ಕ್ಷೇತ್ರ ಭೇಟಿ ಸಂದರ್ಭದಲ್ಲಿ ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.
***********-


