ರೈಲ್ವೆ ಸಚಿವರೊಂದಿಗೆ ಚರ್ಚಿಸಿದ್ದೇನೆ: ಸಂಸದ ಶ್ರೇಯಸ್ ಪಟೇಲ್
ಅರಸೀಕೆರೆ: ಅರಸೀಕೆರೆ ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ್ ರೈಲು ನಿಲುಗಡೆ ನೀಡುವಂತೆ ಪ್ರಯಾಣಿಕರು ಹಾಗೂ ವಿವಿಧ ಸಂಘ-ಸಂಸ್ಥೆಗಳಿಂದ ಬಂದಿರುವ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಈ ಕುರಿತು ಕೇಂದ್ರ ರೈಲ್ವೆ ಸಚಿವರಿಗೆ ಪತ್ರದ ಮೂಲಕ ಮನವಿ ಸಲ್ಲಿಸಲಾಗಿದೆ ಎಂದು ಹಾಸನ ಲೋಕಸಭಾ ಕ್ಷೇತ್ರದ ಸಂಸದ ಶ್ರೇಯಸ್ ಪಟೇಲ್ ತಿಳಿಸಿದರು.
ಅರಸೀಕೆರೆಯಲ್ಲಿ ಮಾಜಿ ನಗರಸಭೆ ಅಧ್ಯಕ್ಷ ಎಂ. ಸಮಿಉಲ್ಲಾ ಅವರ ತಂಗಿ ಮಗಳ ವಿವಾಹ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಂಸದರು, ವಧು-ವರರಿಗೆ ಆಶೀರ್ವಾದ ಸಲ್ಲಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅರಸೀಕೆರೆ ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ್ ರೈಲು ನಿಲುಗಡೆಗೆ ಹಲವು ದಿನಗಳಿಂದ ಬೇಡಿಕೆ ಇದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ಹಾಗೂ ಸಂಘ-ಸಂಸ್ಥೆಗಳ ಮನವಿಯ ಮೇರೆಗೆ ಕೇಂದ್ರ ರೈಲ್ವೆ ಸಚಿವರಿಗೆ ಪತ್ರ ಬರೆದು ನಿಲುಗಡೆ ನೀಡುವಂತೆ ಕೋರಲಾಗಿದೆ ಎಂದರು.
ವಂದೇ ಭಾರತ್ ರೈಲಿಗೆ ಅರಸೀಕೆರೆ ಅಥವಾ ಬೀರೂರು ನಿಲ್ದಾಣದಲ್ಲಿ ನಿಲುಗಡೆ ನೀಡುವ ಕುರಿತು ಚರ್ಚೆಗಳು ನಡೆಯುತ್ತಿವೆ. ಆದರೆ ಅರಸೀಕೆರೆ ನಿಲ್ದಾಣದಲ್ಲೇ ನಿಲುಗಡೆ ನೀಡಬೇಕೆಂದು ರೈಲ್ವೆ ಸಚಿವರೊಂದಿಗೆ ಚರ್ಚಿಸಿದ್ದೇನೆ. ಆದಷ್ಟು ಬೇಗ ಅರಸೀಕೆರೆಯಲ್ಲಿ ವಂದೇ ಭಾರತ್ ರೈಲು ನಿಲುಗಡೆ ದೊರೆಯುವ ನಿರೀಕ್ಷೆಯಿದೆ ಎಂದು ಹೇಳಿದರು.
ಜಿಲ್ಲೆಯ ಅಭಿವೃದ್ಧಿಗೆ ಒತ್ತು
ಹಾಸನ ಜಿಲ್ಲೆಯನ್ನು ಅಭಿವೃದ್ಧಿಯ ಪಥದಲ್ಲಿ ಮತ್ತಷ್ಟು ಮುನ್ನಡೆಸಲು ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಇಲಾಖೆ ಸಚಿವರಾದ ಶಿವಲಿಂಗೇಗೌಡರು ಹಾಗೂ ಜಿಲ್ಲೆಯ ಮುಖಂಡರೊಂದಿಗೆ ಸೇರಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಪ್ರಯತ್ನಿಸಲಾಗುತ್ತಿದೆ ಎಂದು ಸಂಸದ ಶ್ರೇಯಸ್ ಪಟೇಲ್ ತಿಳಿಸಿದರು.
ಜಿಲ್ಲೆಯಲ್ಲಿ ದೊಡ್ಡಮಟ್ಟದ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅಭಿವೃದ್ಧಿಗೆ ವೇಗ ನೀಡಲಾಗುವುದು. 2028ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಹಾಗೂ ಹಾಸನ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸಲು ಒಗ್ಗಟ್ಟಿನಿಂದ ಶ್ರಮಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಮಾಜಿ ನಗರಸಭೆ ಅಧ್ಯಕ್ಷ ಎಂ. ಸಮಿಉಲ್ಲಾ, ಕಾಂಗ್ರೆಸ್ ಮುಖಂಡರಾದ ಶಶಿಧರ್ ಜಿಲ್ಲಾ ವಕ್ಫ್ ಸಲಹಾ ಸಮಿತಿ ಮಾಜಿ ಅಧ್ಯಕ್ಷ ಸೈಯದ್ ಸಿಕಂದರ್, ಮಾಜಿ ಸದಸ್ಯ ದರ್ಶನ್, ನಗರಸಭೆಯ ಮಾಜಿ ಉಪಾಧ್ಯಕ್ಷ ಅಬ್ದುಲ್ ಜಮೀಲ್, ಗ್ಯಾರಂಟಿ ಸಮಿತಿ ಸದಸ್ಯ ಅಮ್ಜದ್ ಪಾಷಾ, ಉದ್ಯಮಿ ನಸ್ರುಲ್ಲಾ, ಪತ್ರಕರ್ತರ ಸಂಘದ ಅಧ್ಯಕ್ಷ ಆನಂದ್, ಝಮೀರ್ ಪಾಷಾ, ಆಫ್ಜಲ್ ಪಾಷಾ, ಸಮೀರ್, ಸೈಯದ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವರದಿ: ಎಂ.ಡಿ. ನಾಸೀರ್, ಅರಸೀಕೆರೆ
ಅರಸೀಕೆರೆಯಲ್ಲಿ ವಂದೇ ಭಾರತ್ ರೈಲು ನಿಲುಗಡೆಗೆ ಶೀಘ್ರದಲ್ಲೇ ನಿರೀಕ್ಷೆ
Leave a Comment
